12ನೇ ತರಗತಿ ಪರೀಕ್ಷೆಗಳು ಮತ್ತು ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಚರ್ಚಿಸಲು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಾಳೆ ಉನ್ನತ ಮಟ್ಟದ ಸಭೆ

 12ನೇ ತರಗತಿ ಪರೀಕ್ಷೆ ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಪ್ರಸ್ತಾಪಗಳ ಬಗ್ಗೆ ಚರ್ಚಿಸಲು ನಾಳೆ ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು, ಶಿಕ್ಷಣ ಕಾರ್ಯದರ್ಶಿಗಳು ಮತ್ತು ರಾಜ್ಯ ಪರೀಕ್ಷಾ ಮಂಡಳಿಗಳ ಅಧ್ಯಕ್ಷರು ಮತ್ತು ಮಧ್ಯಸ್ಥಗಾರರೊಂದಿಗೆ ಉನ್ನತ ಮಟ್ಟದ ವರ್ಚ್ಯುಯಲ್‌ ಸಭೆ ಆಯೋಜಿಸಲಾಗಿದೆ.

ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ, ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವೆ ಶ್ರೀಮತಿ ಸ್ಮೃತಿ ಜುಬಿನ್ ಇರಾನಿ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸುರಕ್ಷತೆ ಮತ್ತು ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳ ಆಯೋಜನೆಗೆ ಸಂಬಂಧಿಸಿದ ಆಯ್ಕೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಶಿಕ್ಷಣ ಸಚಿವಾಲಯ ಮತ್ತು ಸಿಬಿಎಎಸ್‌ಇ ಅನ್ವೇಷಿಸುತ್ತಿವೆ ಎಂದು ರಾಜ್ಯಗಳು/ಕೇಂದ್ರಾಡಳಿತ ರಾಜ್ಯಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಶಿಕ್ಷಣ ಸಚಿವ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಹೇಳಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯು ಉನ್ನತ ಕಲಿಕೆಯ ಸಂಸ್ಥೆಗಳಿಗೆ ಪರೀಕ್ಷೆಗಳ ದಿನಾಂಕಗಳನ್ನು ಅಂತಿಮಗೊಳಿಸುವ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದು ಅವರು ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.

ಕೋವಿಡ್-19 ಸಾಂಕ್ರಾಮಿಕವು ಶಿಕ್ಷಣ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ, ವಿಶೇಷವಾಗಿ ಬೋರ್ಡ್ ಪರೀಕ್ಷೆಗಳು ಮತ್ತು ಪ್ರವೇಶ ಪರೀಕ್ಷೆಗಳ ಮೇಲೆ ಪರಿಣಾಮ ಬೀರಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಬಹುತೇಕ ಎಲ್ಲಾ ರಾಜ್ಯ ಶಿಕ್ಷಣ ಮಂಡಳಿಗಳು, ಸಿಬಿಎಸ್‌ಇ ಮತ್ತು ಐಸಿಎಸ್ಇ ತಮ್ಮ 2021ನೇ ವರ್ಷದ 12ನೇ  ತರಗತಿ ಪರೀಕ್ಷೆಗಳನ್ನು  ಮುಂದೂಡಿವೆ. ಅದೇ ರೀತಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪರೀಕ್ಷೆ ನಡೆಸುವ ಇತರ ಸಂಸ್ಥೆಗಳೂ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯಬೇಕಿದ್ದ ಪ್ರವೇಶ ಪರೀಕ್ಷೆಗಳನ್ನು ಮುಂದೂಡಿವೆ.

12ನೇ ತರಗತಿ ಪರೀಕ್ಷೆಗಳ ಆಯೋಜನೆಯು ದೇಶಾದ್ಯಂತ ರಾಜ್ಯ ಬೋರ್ಡ್‌ ಪರೀಕ್ಷೆಗಳು ಮತ್ತು ಇತರ ಪ್ರವೇಶ ಪರೀಕ್ಷೆಗಳ ಮೇಲೆ ಪರಿಣಾಮ ಬೀರುವುದರಿಂದ ಮತ್ತು ವಿದ್ಯಾರ್ಥಿಗಳಲ್ಲಿ ಅನಿಶ್ಚಿತತೆ ತಪ್ಪಿಸುವ ದೃಷ್ಟಿಯಿಂದ ದೇಶಾದ್ಯಂತ ಎಲ್ಲಾ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 12ನೇ ತರಗತಿ ಸಿಬಿಎಸ್ಇ ಪರೀಕ್ಷೆಗಳ ಬಗ್ಗೆ ವಿವಿಧ ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು ನೀಡುವ ಮಾಹಿತಿ ಆಧಾರದ ಮೇಲೆ ಅಂತಿಮ ತೀರ್ಮಾನ ಕೈಗೊಳ್ಳುವುದು ಅಪೇಕ್ಷಣೀಯವಾಗಿದೆ.

Comments

Popular posts from this blog

ಮಾನವ ಕುಲ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ವಿನೂತನ ಪರಿಹಾರ ಒದಗಿಸಲು ಮುಂದಾಗುವಂತೆ ವಿಜ್ಞಾನಿಗಳಿಗೆ ಉಪ ರಾಷ್ಟ್ರಪತಿ ಕರೆ

ಕೇಂದ್ರ ಸರ್ಕಾರದಿಂದ ಯುವ ಲೇಖಕರ ಮಾರ್ಗದರ್ಶನಕ್ಕೆ ಯುವ-ಪ್ರಧಾನಮಂತ್ರಿಗಳ ಕಾರ್ಯಕ್ರಮ ಆರಂಭ

ಗ್ವಾಲಿಯರ್-ಇಂದೋರ್ ನಡುವಿನ ಮೊದಲ ನೇರ ವಿಮಾನಯಾನಕ್ಕೆ ಚಾಲನೆ ನೀಡಿದ ನಾಗರಿಕ ವಿಮಾನಯಾನ ಖಾತೆ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ